Friday 27 December 2019

ಸ್ವಾಮಿ ಸರ್ವೋತ್ತಮಳೆ ಸಕಲ ಜನಕಾಧಾರೆ ankita varaha timmappa

by ನೆಕ್ಕರ ಕೃಷ್ಣದಾಸರು
ರಾಗ ಭೈರವಿ ಝಂಪೆತಾಳ 

ಸ್ವಾಮಿ ಸರ್ವೋತ್ತಮಳೆ ಸಕಲ ಜನಕಾಧಾರೆ

ಕಾಮಿತಾರ್ಥವನೀವ ಕರುಣಿ ಭೂದೇವಿ||ಪ||

ಹರಿಯ ಪದದಲುದಿಸಿ ಹರಿಗೆ ವಧುವೆನಿಸಿ

ಹರಿಗೆ ಸುತೆಯನು ಇತ್ತು ಹಿರಿಯಳಾದೆ
ಹರಿನಾಮ ಕೀರ್ತನೆಯ ಹೊರೆವ ಧಾರುಣಿ ನಿನ್ನ
ಮೊರೆ ಹೊಕ್ಕೆ ಮರೆಯದಿರು ಕರುಣದೋರೆನಗೆ ||೧||

ಕ್ಷಮೆ ದಮೆಯ ಶಾಂತ ಸದ್ಗುಣವೊಪ್ಪುವಳೆ ನಿನಗೆ

ಭ್ರಮೆಬಟ್ಟು ಭೂಭುಜರು ಕಡಿದುಕೊಳುತಿಹರು
ಅಮಿತ ಮಹಿಳೆ ನಿನ್ನ ನಿಜವ ಬಲ್ಲವರಾರು
ತಮಗೆ ಋಣವಿದ್ದುದನು ಕೊಂಡೊಯ್ವರಲ್ಲದೆ ||೨||

ಚಿನ್ನ ಭಂಡಾರಗಳು ನಿನ್ನೊಡಲೊಳೊಪ್ಪಿದವು

ಉನ್ನತ ರತುನಗಳು ನಿನ್ನೊಳಡಗಿಹವು
ಅನ್ನಪಾನಂಗಳಿಗೆ ಬೀಜಮೂಲವೆ ನೀನು
ನಿನ್ನ ಮರೆತಿಹ ಜನಕೆ ಮುನ್ನ ಸುಖವುಂಟೆ ||೩||

ಒಬ್ಬ ರಾಯನ ಗೆಲುವೆ ಒಬ್ಬ ರಾಯನಿಗೊಲಿವೆ

ಒಬ್ಬನಿಗೆ ಮೈಯ ನೀನು ಕೊಡುವೆ
ಒಬ್ಬರಾದರು ನಿನ್ನ ನಿಜದಿ ಬಾಳ್ದಪರಿಲ್ಲ
ಗರ್ಭಜಾತನ ಹರಿಯ ಕೈಯ ಕೊಲಿಸಿದೆಲಾ ||೪||

ಅಂಬುಧಿಯೆ ವಸನಗಳು ಕುಂಭಕುಚಗಳೆ ಗಿರಿಯು

ಸಂಭ್ರಮದ ನದಿಕಾಲುವೆ ನಿನ್ನ ಬೆವರುಗಳು
ಎಂಭತ್ತನಾಲ್ಕು ಲಕ್ಷ ಜೀವರಾಶಿಗಳೆಲ್ಲ
ತುಂಬಿಕೊಂಡಿರುತಿಹುದು ಅಂಗೋಪಾಂಗದಲಿ ||೫||

ಮೂಢನಾದೆನು ನಿನ್ನ ಬೇಡಿಕೊಂಬರೆ ಮನದಿ

ನೋಡದಿರು ಅವಗುಣವ ರೂಢಿ ದೇವತೆಯೆ
ಮಾಡು ದಯವನು ನೀನು ಮನದಭೀಷ್ಟವನೆಲ್ಲ
ಪಾಡು ಪಂಥವು ಬೇಡ ಪಡೆದ ಮಗನೊಡನೆ ||೬||

ನಂಬಿದೆನು ನಾ ನಿನ್ನ ಕುಂಭಿನಿಯೆ ಕೈವಿಡಿದು

ಇಂಬಾದ ಪದವಿಯನು ಸಂಭ್ರಮದಿ ಕೊಡುತ
ಬೆಂಬಿಡದೆ ವರಾಹ ತಿಮ್ಮಪ್ಪ ಕರುಣದಲಿ
ಹಂಬಲಿಪ ತೆರದಿಂದ ಸಲಹುವುದು ಜಗದಿ ||೭||
******

No comments:

Post a Comment